
ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ ೧೯೬೦ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು.
ಊಳಿಗಮಾನ್ಯಸಂಸ್ಕೃತಿಯ ಮೂಲರೂಪ ಅರ್ಥಾತ್ classical model of feudal structure ಇದರ ಮುಖ್ಯ ಗುಣವೆಂದರೆ, ಶೋಷಿತನು ತನ್ನ ತನು ಹಾಗು ಮನವನ್ನಷ್ಟೇ ಅಲ್ಲ, ತನ್ನ ಆತ್ಮವನ್ನೂ ಸಹ ತನ್ನ ಯಜಮಾನನ ಊಳಿಗಕ್ಕೆ ಬೇಶರತ್ತಾಗಿ ಒಪ್ಪಿಸಿಬಿಟ್ಟಿರುತ್ತಾನೆ. ಇದಕ್ಕೆ ಪ್ರತಿಯಾಗಿ ಯಜಮಾನನು ದರ್ಪ, ದಬ್ಬಾಳಿಕೆ ಹಾಗು ಸರ್ವಸ್ವಾಮಿತ್ವವನ್ನು ಪ್ರದರ್ಶಿಸುತ್ತಾನೆ. ಇಂತಹ ತಮಂಧದ ಕೇಡಿನಿಂದ ಹೊರಬರಬೇಕಾದರೆ ಶಿಕ್ಷಣದ ಬೆಳಕು ಬೇಕು. ಆದರೆ ಈ ವ್ಯವಸ್ಥೆಯು ಅಂತಹ ಶಿಕ್ಷಿತ ಪ್ರತಿಭಟನಾಕಾರರನ್ನೂ ಸಹ ನಿರ್ದಾಕ್ಷಿಣ್ಯವಾಗಿ ಹೊಸಕಿ ಹಾಕಿ ಬಿಡುತ್ತದೆ.
ನುಗಡೋಣಿಯವರ "ತಮಂಧದ ಕೇಡು" ಎನ್ನುವ ಕತೆಯಲ್ಲಿ ದುರುಗ ಎನ್ನುವ ಜೀತದಾಳಿನ ದುಃಸ್ವಪ್ನದೊಂದಿಗೆ ಕತೆ ಪ್ರಾರಂಭವಾಗುತ್ತದೆ. ತನ್ನ ಒಡೆಯನಾದ ಶಾಂತಗೌಡನ ಜಮೀನಿನಲ್ಲಿರುವ ಎರಡು ದೊಡ್ಡ ಮರಗಳ ನಡುವೆ ಜೋಪಡಿ
ಹಾಕಿಕೊಂಡು, ದುರುಗ ತನ್ನ ಹೆಂಡತಿ ಚಂದವ್ವ ಹಾಗು ಜೋಳಿಗೆ ಕೂಸು ಚೆನ್ನಮಲ್ಲಪ್ಪನೊಂದಿಗೆ ಬದುಕು ಸಾಗಿಸುತ್ತಿದ್ದಾನೆ.
ಒಡೆಯನಿಗೆ ನಿಷ್ಠೆಯಿಂದ ದುಡಿಯುವದರಿಂದ ದುರುಗ ಶಾಂತಗೌಡನ ನೆಚ್ಚಿನ ಆಳಾಗಿದ್ದಾನೆ. ಶಾಂತಗೌಡ ‘ದುರುಗಾ’ ಎಂದು ಕೂಗಿದಾಗ, ದುರುಗನಿಗೆ ಇದು ಪುಣ್ಯದ ಕರೆಯಂತೆ ಕೇಳಿಸುವಷ್ಟು ಈತ ಶಾಂತಗೌಡನ ದಾಸನಾಗಿದ್ದಾನೆ.
ಇಂತಹ ದುರುಗನ ಚಂದದ ಹೆಂಡತಿ ಚಂದಮ್ಮನ ಮೇಲೆ ಶಾಂತಗೌಡನಿಗೆ ಮನಸ್ಸಾಗುತ್ತದೆ.
ಚಂದಮ್ಮ ತನ್ನ ದಣಿಗೆ ಪ್ರತಿಭಟನೆ ಇಲ್ಲದೆ ವಶವಾದಳು. ಆದರೆ ಈ ಕೆಂಡವನ್ನು ಮನದಲ್ಲಿಯೇ ಇಟ್ಟುಕೊಂಡಿರಲು ಅವಳಿಂದ ಸಾಧ್ಯವಾದೀತೆ? ಕೊನೆಗೊಮ್ಮೆ ತನ್ನ ಗಂಡ ದುರುಗನೆದುರಿಗೆ ಅವಳು ತನ್ನ ಸಂಕಟವನ್ನು ಬಿಚ್ಚಿಟ್ಟಳು. ದುರುಗನಾದರೋ ತನ್ನ ತನು, ಮನಗಳನ್ನು ತನ್ನ ದಣಿಗೆ ಒಪ್ಪಿಸಿಬಿಟ್ಟ ಊಳಿಗದಾಳು. ಆತ ಏನು ಮಾಡಿಯಾನು?
ತಪ್ಪು ಮಾಡಿದವನು ದಣಿ. ಆದರೆ ದುರುಗನೇ ಆತನ ಕಾಲಿಗೆ ಬಿದ್ದು ಅತ್ತು ಬಿಡುತ್ತಾನೆ! ತನ್ನ ಹೆಂಡತಿಯನ್ನು ಮರಳಿ ಕರೆ ತರುತ್ತಾನೆ. ಶಾಂತಗೌಡ ದಣಿಯ ಹಕ್ಕನ್ನು ದುರುಗನ ಹೆಂಡತಿಯ ಮೇಲೆ ಮರುಸ್ಥಾಪಿಸುತ್ತಾನೆ. ಇಷ್ಟಾದರೂ ದುರುಗ ಆ ಹಳ್ಳಿಯನ್ನು ಬಿಟ್ಟು, ತನ್ನ ದಣಿಯನ್ನು ಬಿಟ್ಟು ಬೇರೆಲ್ಲೂ ಹೋಗುವದಿಲ್ಲ! ಯಾಕೆಂದರೆ ಆತ ತನ್ನ ದಾಸ್ಯತ್ವವನ್ನು ಕಾಯಾ, ವಾಚಾ, ಮನಸಾ ಒಪ್ಪಿಕೊಂಡು ಬಿಟ್ಟಿದ್ದಾನೆ.
ಇತ್ತ ಚಂದಮ್ಮನೂ ಬಹಳ ದಿನ ಬದುಕುವದಿಲ್ಲ. ದುರುಗನ ಮಗ ಊರ ಮಗನಾಗಿ ಬೆಳೆದವನು ಹೆಚ್ಚಿನ ಕಲಿಕೆಗಾಗಿ ಶಹರಕ್ಕೆ ಹೋಗುತ್ತಾನೆ. ಯಜಮಾನ ಶಾಂತಗೌಡ ತನ್ನ ನೆಚ್ಚಿನ ಬಂಟನ ಮಗನ ಶಿಕ್ಷಣಕ್ಕೆ ಉದಾರವಾಗಿ ನೆರವು ನೀಡುತ್ತಾನೆ. ಚೆನ್ನಮಲ್ಲಪ್ಪ ಆ ಶಹರದ ಶಾಲೆಯಲ್ಲಿಯೇ ಶಿಕ್ಷಕನಾಗುತ್ತಾನೆ.
ಶಾಂತಗೌಡನ ಒಬ್ಬಳೇ ಸಂತಾನವಾದ ಅಕ್ಕಮಹಾದೇವಿ ಕಲಿಯಲೆಂದು ಶಹರದಲ್ಲಿಯೇ ಇದ್ದವಳು ಚೆನ್ನಮಲ್ಲಪ್ಪನಲ್ಲಿ ಅನುರಕ್ತಳಾಗುತ್ತಾಳೆ. ಈ ಆಘಾತಕಾರಿ ಸುದ್ದಿ ತನಗೆ ಬಂದು ಮುಟ್ಟಿದೊಡನೆಯೆ ದುರುಗ ನಿರ್ವಿಣ್ಣನಾಗಿ ತನ್ನ ಮಗನಿಗೆ ಬುದ್ಧಿ ಹೇಳುತ್ತಾನೆ. ಆ ಬುದ್ಧಿಮಾತಿನಲ್ಲೂ ಸಹ ಆತನ ದಾಸ್ಯಭಾವ ಹೇಗೆ ಮೇಲುಗೈಯಾಗಿದೆಯೆನ್ನುವದನ್ನು ನೋಡಿರಿ:
"ನನ್ಗ ಇಲ್ಲಿ ಬುಡಾದ ನಂಟದ" ಎಂದು ಹೇಳುವ ದುರುಗನಿಗೆ ಇರುವ ನಂಟು ಎಂತಹದು? ದುರುಗ ಇರುತ್ತಿದ್ದ ಮರಗಳ ನಡುವಿನ ಜೋಪಡಿ ಈಗಿಲ್ಲ. ಮರಮಟ್ಟುಗಳನ್ನು ಮಾಡಿಸಲು ಶಾಂತಗೌಡ ಆ ಮರಗಳನ್ನು ಕಡಿಸಿ ಹಾಕಿದ್ದಾನೆ. ದುರುಗನಿಗೆ ಹಾಗೂ ನೂರಾರು ಹಕ್ಕಿಗಳಿಗೆ ಆಸರೆಯಾಗಿದ್ದ ಆ ಮರಗಳು, ಯಜಮಾನಿಕೆಯ ಉಪಭೋಗಕ್ಕಾಗಿ ನಷ್ಟವಾಗಿವೆ. ದುರುಗ ಹಾಗು ಆ ಮರಗಳ ನಡುವೆ ಭಾವನಾತ್ಮಕ ಸಂಬಂಧವಿತ್ತು. ದುರುಗ ದೈನಾಸಪಡುತ್ತ ಆ ಮರಗಳನ್ನು ಉಳಿಸಲು ಶಾಂತಗೌಡನಿಗೆ ಬೇಡಿಕೊಳ್ಳುವದು ಹೀಗೆ:
ಇದಕ್ಕೆ ಪ್ರತಿಯಾಗಿ ಶಾಂತಗೌಡನಲ್ಲಿರುವದು ದರ್ಪ ಹಾಗು ಸಿಟ್ಟಿನ ಸ್ವಭಾವ. ಎಲ್ಲವೂ ತನಗಾಗಿಯೇ, ತನ್ನ ಉಪಭೋಗಕ್ಕಾಗಿಯೇ ಇರುವದು ಎನ್ನುವ ಅಹಂಭಾವ. (‘ಶಾಂತಗೌಡ’ ಎನ್ನುವ ಹೆಸರಿನ ಅಸಂಗತತೆಯನ್ನು ಗಮನಿಸಿರಿ.) ದುರುಗನ ಮೇಲಿನ ತನ್ನ ಸಿಟ್ಟನ್ನು ಆತ ಇತರ ಆಳುಗಳ ಮೇಲೆ ಹಾಗು ಜಾನುವಾರುಗಳ ಮೇಲೆ ತಿರುಗಿಸುವದರ ವರ್ಣನೆ ಹೀಗಿದೆ:
ಶಾಂತಗೌಡ ಹೊಳೆಯ ಈಚೆಯ ಹಳ್ಳಿಯಲ್ಲಿದ್ದರೆ, ಹೊಳೆಯ ಆಚೆಯ ಬದಿಯಲ್ಲಿ ಅವನ ಅಕ್ಕ ಇದ್ದಾಳೆ. ವಿಧವೆಯಾದ ಮೇಲೆ
ತಾನೇ ಜಮೀನುದಾರಿಕೆಯನ್ನು ಗೌಡತಿಯ ಎಲ್ಲಾ ಗತ್ತಿನೊಂದಿಗೆ ನಡೆಯಿಸಿಕೊಂಡು ಹೋಗುತ್ತಿದ್ದಾಳೆ. ಸೇತುವೆ ಇಲ್ಲಿ ಇಲ್ಲದ್ದರಿಂದ ದುರುಗನೇ ಶಾಂತಗೌಡನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೊಳೆ ದಾಟಿಸುತ್ತಿದ್ದ.
ಶಾಂತಗೌಡನ ಮಗಳನ್ನು ತನ್ನ ಸೊಸೆಯನ್ನಾಗಿ ಮಾಡಿಕೊಂಡರೆ, ತಮ್ಮನ ಆಸ್ತಿ ಎಲ್ಲ ತನಗೇ ಬರುವದೆನ್ನುವ ಒಳ ಆಸೆ ಈ ಅಕ್ಕನಿಗಿದೆ. ಆದರೆ ಅಕ್ಕಮಹಾದೇವಿ ಊಳಿಗದ ಆಳಾದ ದುರುಗನ ಮಗ ಚೆನ್ನಮಲ್ಲಪ್ಪನಲ್ಲಿ ಅನುರಕ್ತಳಾಗಿದ್ದಾಳೆ. ಶಾಂತಗೌಡನು ದುರುಗನ ಹೆಗಲ ಮೇಲೆ ಸವಾರಿ ಮಾಡಿಕೊಂಡು, ಹೊಳೆ ದಾಟಿ ತನ್ನ ಅಕ್ಕನಿದ್ದಲ್ಲಿಗೆ ಬಂದು ಅವಳೊಡನೆ ಈ ಸಮಸ್ಯೆಯ ಬಗೆಗೆ ಆಪ್ತಾಲೋಚನೆ ಮಾಡುತ್ತಾನೆ.
ಯಜಮಾನಸಂಸ್ಕೃತಿಯ ಪಟ್ಟದಲ್ಲಿರುವ ವ್ಯಕ್ತಿಗೆ ತನ್ನ ಪಟ್ಟದ ಭದ್ರತೆಯೊಂದೇ ಮುಖ್ಯ. ಸ್ವಾರ್ಥಸಾಧನೆಯ ಕ್ರೌರ್ಯ ಈ ವ್ಯಕ್ತಿಯ ಅಂತರಾಳದಲ್ಲಿ ಲಿಂಗಭೇದವಿಲ್ಲದೇ ಹುದುಗಿರುತ್ತದೆ. ತನ್ನ ತಮ್ಮನಿಗೆ ಅವಳು ಕೊಡುವ ಸಲಹೆಯು ಅವಳ ತಮ್ಮನನ್ನೂ ಸಹ ಒಂದು ನಿಮಿಷ ನಡುಗಿಸಿ ಬಿಡುತ್ತದೆ:
ಶಾಂತಗೌಡ ಹಳ್ಳಿಗೆ ಮರಳುವಾಗ ಮತ್ತೆ ದುರುಗನ ಮೇಲೆ ಸವಾರಿ ಮಾಡಿ ಹೊಳೆ ದಾಟಬೇಕು. ಹೊಳೆ ದಾಟುವಾಗ ತನ್ನ ದಣಿಯನ್ನು ಹೊಳೆಯಲ್ಲಿ ಮುಳುಗಿಸಿಬಿಡುವದು ದುರುಗನಿಗೆ ಸುಲಭವಾದ ಕೆಲಸ; ಆದರೆ ಸರಳವಾದ ಕೆಲಸವಲ್ಲ. ಯಾಕೆಂದರೆ ಜೀತದಾಳಾದ ಆತನು ತನ್ನ ಒಡೆಯನ ಕೇಡನ್ನು ಕನಸುಮನಸಿನಲ್ಲೂ ಎಣಿಸಲಾರ. ದುರುಗನ ಮನದಲ್ಲಿ ನಡೆದ ತುಮುಲದ ವರ್ಣನೆಯನ್ನು ನುಗಡೋಣಿಯವರು ಈ ರೀತಿಯಾಗಿ ಮಾಡಿದ್ದಾರೆ:
ನುಗಡೋಣಿಯವರ ವೈಶಿಷ್ಟ್ಯವೆಂದರೆ, ಅವರು ಶೋಷಿತನ ಬವಣೆಯ ವರ್ಣನೆಗಿಂತ, ಶೋಷಣಾವ್ಯವಸ್ಥೆಯ ಚಿತ್ರಣಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ. ಇಲ್ಲಿ ದರ್ಪವೇ ಮೂರ್ತಿವೆತ್ತ ಯಜಮಾನ ಹಾಗು ದಾಸ್ಯವೇ ಮೂರ್ತಿವೆತ್ತ ಊಳಿಗದಾಳನ್ನು ಕಾಣುತ್ತೇವೆ.
ಈ ಶೋಷಣಾವ್ಯವಸ್ಥೆಯಲ್ಲಿ ಯಜಮಾನನ ಮನೆತನಕ್ಕೊಬ್ಬ ಹಿತಚಿಂತಕ ಗುರುಗಳೂ ಇರುತ್ತಾರೆ. ಆದರೆ ಬುದ್ಧಿ ಹೇಳುವ ಶಕ್ತಿ ಅವರಿಗಿರುವದಿಲ್ಲ. ಇಂತಹ ಕತೆಗಳ ಅನಿವಾರ್ಯ ದುರಂತವನ್ನು ನಿರ್ಲಿಪ್ತ ಶೈಲಿಯಲ್ಲಿ ಚಿತ್ರಿಸುವದು ನುಗಡೋಣಿಯವರ ಹೆಗ್ಗಳಿಕೆ.
ಉತ್ತರ ಕರ್ನಾಟಕದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಜಾಗೃತಿಯ ಉದ್ದೇಶದಿಂದ ೧೯೩೩ನೆಯ ಇಸವಿಯಲ್ಲಿ , ‘ಸಂಯುಕ್ತ ಕರ್ನಾಟಕ’ ಪತ್ರಿಕೆಯು ಬೆಳಗಾವಿಯಲ್ಲಿ ಪ್ರಾರಂಭವಾಯಿತು. ಅನೇಕ ವರ್ಷಗಳವರೆಗೆ ಈ ಪತ್ರಿಕೆಯು ತನ್ನ ಆದರ್ಶ ಮತ್ತು ಧ್ಯೇಯಗಳಿಗೆ ಅನುಸಾರವಾಗಿ ಅತ್ಯುತ್ತಮ ಕೆಲಸವನ್ನು ಮಾಡಿತು. ಈ ಪತ್ರಿಕೆಯ ಪೂರ್ವಕಾಲದ ಸಂಪಾದಕರಾದ ಮೊಹರೆ ಹಣಮಂತರಾಯರು, ಹ.ರಾ.ಪುರೋಹಿತರು ಹಾಗು ಸಂಪಾದಕವರ್ಗದಲ್ಲಿದ್ದ ಪಾ.ವೆಂ.ಆಚಾರ್ಯರು ಇವರೆಲ್ಲ ತಮ್ಮ ಶ್ರದ್ಧೆ ಹಾಗು ನಿಷ್ಠೆಯ ಪರಿಶ್ರಮದಿಂದ ಪತ್ರಿಕೆಯನ್ನು ಉನ್ನತ ಮಟ್ಟಕ್ಕೆ ತಲುಪಿಸಿದರು.
ಕನ್ನಡದಲ್ಲಿ ಪತ್ರಿಕೆಗಳು ಬಳಸಬಹುದಾದ ಪ್ರಮಾಣಿತ ಪದಗಳು ಇನ್ನೂ ಇರದಂತಹ ಆ ಸಮಯದಲ್ಲಿ ‘ಸಂಯುಕ್ತ ಕರ್ನಾಟಕ’ವು ಇಂತಹ ಪತ್ರಿಕಾಪದಗಳನ್ನು ಅಂದರೆ standard journalistic terminologyಯನ್ನು ರೂಪಿಸಿತು. ಇದು ಪತ್ರಿಕಾಭಾಷೆಗೆ ‘ಸಂಯುಕ್ತ ಕರ್ನಾಟಕ’ವು ನೀಡಿದ ದೊಡ್ಡ ಕೊಡುಗೆಯಾಗಿದೆ.
ಒಂದು ಕಾಲದಲ್ಲಿ ಪತ್ರಿಕೋದ್ಯಮವು ಲೋಕಶಿಕ್ಷಣದ ಸಾಧನವಾಗಿತ್ತು. ಇಂದು ಅದು ದೊಡ್ಡ ಉದ್ದಿಮೆಯಾಗಿದೆ. ಈ ಉದ್ದಿಮೆಯಲ್ಲಿ ಭಾಷೆಗೆ, ವ್ಯಾಕರಣಕ್ಕೆ ಅಥವಾ ಕಾಗುಣಿತಕ್ಕೆ ಏನೂ ಬೆಲೆ ಇಲ್ಲವೇನೋ ಎನ್ನುವ ಕಳವಳವು ‘ಸಂಯುಕ್ತ ಕರ್ನಾಟಕ’ದ ಓದುಗರನ್ನು ಬಾಧಿಸುತ್ತದೆ. ‘ಸಂಯುಕ್ತ ಕರ್ನಾಟಕ’ದ ನಿಯಮಿತ ಓದುಗನಾದ ನನಗೆ, ಈ ನನ್ನ ಪ್ರಿಯ ಪತ್ರಿಕೆಯಲ್ಲಿ ಐದು ನಮೂನೆಯ ತಪ್ಪುಗಳು ಕಂಡು ಬರುತ್ತಿವೆ. ಇವುಗಳನ್ನು ‘ಪತ್ರಿಕಾಪ್ರಪಂಚದ ಪಂಚ ಮಹಾಪಾತಕ’ಗಳು ಎಂದು ಕರೆದರೆ ತಪ್ಪಿಲ್ಲ. ಇದರಿಂದ ದುಃಖಿತನಾದ ನಾನು ನನ್ನ ಚಡಪಡಿಕೆಯನ್ನು ನಿಮ್ಮೊಡನೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ನನ್ನ ತಿಳಿವಳಿಕೆಯಲ್ಲಿಯೇ ತಪ್ಪಿದ್ದರೆ, ದಯವಿಟ್ಟು ನನ್ನನ್ನು ತಿದ್ದಲು ಕೋರಿಕೊಳ್ಳುತ್ತೇನೆ.
(೧) ಕಾಗುಣಿತದ ತಪ್ಪುಗಳು:
ಕಾಗುಣಿತದ ತಪ್ಪುಗಳು ಅತ್ಯಂತ ಪ್ರಾಥಮಿಕ ತಪ್ಪುಗಳು. ಅಚ್ಚುಮೊಳೆಗಳನ್ನು ಜೋಡಿಸಿ ಪತ್ರಿಕೆಗಳನ್ನು ಮುದ್ರಿಸುವ ಕಾಲವೊಂದಿತ್ತು. ಅಂತಹ ಸಮಯದಲ್ಲಿಯೂ ಸಹ ಮುದ್ರಣದೋಷಗಳು ವಿರಳವಾಗಿದ್ದವು. ಗಣಕಯಂತ್ರದ ಬಳಕೆ ಮಾಡುವ ಈ ಕಾಲದಲ್ಲಿ ಕಾಗುಣಿತದ ತಪ್ಪುಗಳು ಹೇರಳವಾಗಿ ಕಂಡುಬರುವದು ಆಘಾತಕರವಾಗಿದೆ. ಒಂದು ಪರಿಚ್ಛೇದದಲ್ಲಿ ಅಥವಾ ಒಂದು ಪುಟದಲ್ಲಿ ಕಾಗುಣಿತದ ಎಷ್ಟು ತಪ್ಪುಗಳು ಕಂಡು ಬರಬಹುದು? ‘ಸಂಯುಕ್ತ ಕರ್ನಾಟಕ’ದ ಒಂದೇ ಪುಟದಲ್ಲಿ ನಾನು ಸ್ವೈಚ್ಛಿಕ ಅವಲೋಕನ ಮಾಡಿದಾಗ ಹನ್ನೊಂದು ತಪ್ಪುಗಳು ಕಂಡು ಬಂದವು. ಇವು ಅಚ್ಚಿನ ದೋಷಗಳಲ್ಲ ; ಆದರೆ ಕಾಗುಣಿತದ ತಪ್ಪುಗಳು ಎನ್ನುವ ಸಂಗತಿಯನ್ನು ನಾನು ವಿಷಾದಪೂರ್ವಕವಾಗಿ ನಿಮ್ಮ ಗಮನಕ್ಕೆ ತರಬಯಸುತ್ತೇನೆ. ನಾನು ತಿಳಿದಂತಹ ಕೆಲವು ತಪ್ಪುಗಳನ್ನು ಉದಾಹರಣೆಗೆಂದು ನಿಮ್ಮ ಮುಂದೆ ಇಡುತ್ತಿದ್ದೇನೆ. Standard News Paper ಎಂದು ಭಾವಿಸಲಾದ ಪತ್ರಿಕೆಯಲ್ಲಿ ಇಷ್ಟು ತಪ್ಪುಗಳು ಕಾಣಬಾರದು, ಅಲ್ಲವೆ?
ದಿನಾಂಕ ತಪ್ಪು ಒಪ್ಪು೨೩--೯-೦೯ ಸ್ಕೈಐವಿಂಗ್ ಸ್ಕೈಡೈವಿಂಗ್
೨೩--೯-೦೯ ಶೀಖರ
ಶಿಖರ
೨೬-೯-೦೯ ವಿಶಿಷ್ಠ ವಿಶಿಷ್ಟ
೨೬-೯-೦೯ ದಿಕ್ಷಿತಲು ದೀಕ್ಷಿತರು
೨೬-೯-೦೯ ಪ್ರೀಟಿ ಪ್ರೀತಿ
೨೬-೯-೦೯ ನಿಗಧಿತ ನಿಗದಿತ
೨೬-೯-೦೯ ಸ್ಕಂಧ್ ಸ್ಕಂದ
೨೬-೯-೦೯ ಮಾಲಿದ್ದಾರೆ ಮಾಡಲಿದ್ದಾರೆ
೨೬-೯-೦೯ ಎದು ಎಂದು
೨೬-೯-೦೯ ಪ್ರೊಬೆಷನರಿ ಪ್ರೊಬೇಷನರಿ
೨೬-೯-೦೯ ಪರಿಶಿಷ್ಠ ಪರಿಶಿಷ್ಟ
೨೭-೯-೦೯ ದಿಗ್ಭಂದನ ದಿಗ್ಬಂಧನ
೨೭-೯-೦೯ ಹಲ್ಯೆಯನ್ನು ಹಲ್ಲೆಯನ್ನು
೨೭-೯-೦೯ ಪರೀಶಿಲಿಸಿ ಪರಿಶೀಲಿಸಿ
೨೭-೯-೦೯ ಘಂಟೇಪ್ಪನವರ ಘಂಟೆಪ್ಪನವರ
೨೭-೯-೦೯ ಅದಿಕಾರಿಗಳಲ್ಲಿ ಅಧಿಕಾರಿಗಳಲ್ಲಿ
೨೭-೯-೦೯ ವಿಶ್ವಬ್ಯಾಂಕನಂಥ ವಿಶ್ವಬ್ಯಾಂಕನಂತಹ
೨೯-೯-೦೯ ಬ್ರೀಜ್ ಬ್ರಿಜ್
೨೯-೯-೦೯ ಮಥ ಮೃತ
೨೯-೯-೦೯ ಹರ್ಷೋದ್ಘಾರ ಹರ್ಷೋದ್ಗಾರ
೨೯-೯-೦೯ ಸ್ತಬ್ದ ಸ್ತಬ್ಧ
೨೯-೯-೦೯ ಕೈಗೂಳ್ಳುವದಾಗಿ ಕೈಗೊಳ್ಳುವದಾಗಿ
೨೯-೯-೦೯ ಅನಿಷ್ಠಾನ ಅನುಷ್ಠಾನ
೨೯-೯-೦೯ ಅಂಕೀತ ಅಂಕಿತ
೨೯-೯-೦೯ ಹರಿಸಿದ್ದಾರೆ ಹರಸಿದ್ದಾರೆ.
೨೯-೯-೦೯ ಶುಭಾಷಯ ಶುಭಾಶಯ
೨೯-೯-೦೯ ವಿಜಯದಶಿಮಿ ವಿಜಯದಶಮಿ
೨೯-೯-೦೯ ಅವ್ವಾಹತವಾಗಿ ಅವ್ಯಾಹತವಾಗಿ
೨೯-೯-೦೯ ಪುನಶ್ಛೇತನ ಪುನಶ್ಚೇತನ
೨೯-೯-೦೯ ವಿಶಿಷ್ಠ ವಿಶಿಷ್ಟ
೩೦-೯-೦೯ ಅನುಷ್ಟಾನ ಅನುಷ್ಠಾನ
೩೦-೯-೦೯ ಮಧ್ಯಾನ್ಹದಿಂದ ಮಧ್ಯಾಹ್ನದಿಂದ
೩೦-೯-೦೯ ಕಾಲ್ಕಿತಿತ್ತು ಕಾಲ್ಕಿತ್ತಿತು
(೨) ವ್ಯಾಕರಣದೋಷಗಳು:
ಕಾಗುಣಿತದ ತಪ್ಪುಗಳನ್ನು ಅಚ್ಚಿನ ದೋಷಗಳೆಂದು ಹೇಳಿ ಪಾರಾಗಬಹುದು. ಆದರೆ ವ್ಯಾಕರಣದ ತಪ್ಪುಗಳಿಗೆ ಯಾರು ಹೊಣೆ? ತಮ್ಮಲ್ಲಿ ಪರಿಶೀಲನೆಗೆ ಬಂದಂತಹ ವರದಿಗಳನ್ನು ಸಂಪಾದಕರು ಕಣ್ಣು ಮುಚ್ಚಿಕೊಂಡು ಓದುತ್ತಾರೆಯೆ? ಅಥವಾ ಕನ್ನಡ ವ್ಯಾಕರಣವನ್ನು ಚಿತ್ರಹಿಂಸೆಗೆ ಒಳಪಡಿಸುತ್ತಿರುವಾಗ ಇವರಿಗೆ ಏನೂ ನೋವಾಗುವದಿಲ್ಲವೆ? ಇದು ಸಂಪಾದಕರ ಹೊಣೆಗಾರಿಕೆ ಅಲ್ಲವೆ? ವ್ಯಾಕರಣದ ಮೃಗಯಾವಿಹಾರದ ಕೆಲವೊಂದು ಉದಾಹರಣೆಗಳು ಹೀಗಿವೆ:
೨೬-೯-೦೯(೧)ತಪ್ಪು: ಮಳೆಗೆ ಕೋಟ್ಯಂತರ ಆಸ್ತಿ ನಷ್ಟ
ಒಪ್ಪು: ಮಳೆಯಿಂದ ಕೋಟ್ಯಂತರ ಆಸ್ತಿ ನಷ್ಟ
(೨) ತಪ್ಪು: ಮಿಷಿನ್ ಗಳ
ಒಪ್ಪು: ಮಶೀನುಗಳ
೨೭-೯-೦೯(೧) ತಪ್ಪು: ಸೂಕ್ತ ಆರೋಪಿಗಳನ್ನು
ಒಪ್ಪು: ನೈಜ ಅಪರಾಧಿಗಳನ್ನು
(ಟಿಪ್ಪಣಿ: ಸೂಕ್ತ ಎಂದರೆ ವಿಧಿ-ವಿಧಾನಗಳಲ್ಲಿ ಹೇಳಿದ ಮೇರೆಗೆ ಎಂದು ಅರ್ಥ.
ಆರೋಪಿಗಳು ಅಪರಾಧಿಗಳಾಗಿರಬೇಕಿಲ್ಲ.)
(೨) ತಪ್ಪು: ಬೆಳಗ್ಗೆ ನಿಲ್ದಾಣಕ್ಕೆ ಆಗಮಿಸಿತ್ತು.
ಒಪ್ಪು: ಬೆಳಗಿನ ಸಮಯದಲ್ಲಿ ನಿಲ್ದಾಣಕ್ಕೆ ಆಗಮಿಸಿತ್ತು.
(೩) ತಪ್ಪು: ಅಂತಾರಾಷ್ಟ್ರೀಯ (=inland)
ಒಪ್ಪು: ಅಂತರರಾಷ್ಟ್ರೀಯ (=international)
೨೯-೯-೦೯(೧) ತಪ್ಪು: ಪೋಲೀಸ ಠಾಣೆ ಸಂಪರ್ಕಿಸಲು
ಒಪ್ಪು: ಪೋಲೀಸ ಠಾಣೆಯನ್ನು ಸಂಪರ್ಕಿಸಲು
(೨) ತಪ್ಪು: ಜನತೆ ದಸರಾ ಹಬ್ಬವನ್ನು ಆಚರಿಸಿದರು
ಒಪ್ಪು: ಜನತೆ ದಸರಾ ಹಬ್ಬವನ್ನು ಆಚರಿಸಿತು (ಅಥವಾ, ಜನರು .....ಆಚರಿಸಿದರು.)
(೩) ತಪ್ಪು: ಶುಭ್ರವರ್ಣದ ಹೊಸ ಬಟ್ಟೆಗಳನ್ನು
ಒಪ್ಪು: ಶುಭ್ರವಾದ ಹೊಸ ಬಟ್ಟೆಗಳನ್ನು
(ಟಿಪ್ಪಣಿ: ಶುಭ್ರ=ಸ್ವಚ್ಛ. ವರ್ಣ ಶುಭ್ರವಾಗಿರುವದೊ ಅಥವಾ ಬಟ್ಟೆ ಶುಭ್ರವಾಗಿರುವದೊ?)
(೩) ಭಾಷೆಯ ತಪ್ಪುಗಳು: ವ್ಯಾಕರಣವು ಸಂಪಾದಕರಿಗೆ ಮಹತ್ವದ ವಿಷಯವೆಂದು ಅನ್ನಿಸಿರಲಿಕ್ಕಿಲ್ಲ ಎಂದು ಭಾವಿಸೋಣ. ಆದರೆ ಭಾಷೆಯ ತಪ್ಪು ಮಾತ್ರ ಒಂದು ಪತ್ರಿಕೆಯು ಎಂದೂ ಮಾಡಬಾರದ ತಪ್ಪು. ಓದುಗರನ್ನು ಸುಶಿಕ್ಷಿತರನ್ನಾಗಿ ಮಾಡುವದು ಯಾವುದೇ ಪತ್ರಿಕೆಯ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ. ಪತ್ರಿಕೆಯ ಭಾಷೆಯನ್ನು ಪ್ರಮಾಣಿತ ಭಾಷೆ ಎಂದು ಗ್ರಹಿಸಿಕೊಳ್ಳುವ ಓದುಗರು ಭಾಷಾದೋಷಗಳನ್ನು ಅರಿಯದೇ ಅಂತರ್ಗತಗೊಳಿಸಿಕೊಳ್ಳುತ್ತಾರೆ. ಆ ತಪ್ಪುಗಳನ್ನು ತಾವೂ ಎಲ್ಲೆಡೆ ಹರಡುತ್ತಾರೆ. ಇದರಿಂದ ಾಷಾದೋಷವು ಸರ್ವವ್ಯಾಪಿಯಾಗಿ ಬಿಡುತ್ತದೆ. ‘ಸಂಯುಕ್ತ ಕರ್ನಾಟಕ’ದಲ್ಲಿಯ ಕೆಲವು ಭಾಷಾದೋಷಗಳನ್ನು ಗಮನಿಸೋಣ:
"ಸಾರ್ವಜನಿಕ ಸ್ಥಳದಲ್ಲಿ ಗುಡಿ ನಿರ್ಮಾಣಕ್ಕೆ ಸುಪ್ರೀಂ ನಿರ್ಬಂಧ" ಎನ್ನುವ ಈ ವರದಿಯನ್ನು ನೋಡಿರಿ. ಸಂಯುಕ್ತ ಕರ್ನಾಟಕವು ಹಾಗೂ ಇತರ ಪತ್ರಿಕೆಗಳು ಅನೇಕ ವರ್ಷಗಳಿಂದ ‘ಸರ್ವೋಚ್ಚ ನ್ಯಾಯಾಲಯ’ ಎನ್ನುವ ಪದವನ್ನು ಬಳಸುತ್ತಲೇ ಬಂದಿವೆ. ಈ ಪದವು ಕನ್ನಡ ಓದುಗರಿಗೆ ಅರ್ಥವಾಗುವಂತಹ ಪದವೇ ಆಗಿದೆ. ಏಕಾಏಕಿಯಾಗಿ ಈ ಪದಕ್ಕೆ ಬದಲಾಗಿ ‘ಸುಪ್ರೀಂ ಕೋರ್ಟ’ ಎನ್ನುವ ಆಂಗ್ಲ ಪದ ಬಳಸುವ ಅನಿವಾರ್ಯತೆಯನ್ನು ಸಂಪಾದಕರೇ ಹೇಳಬೇಕು! ಸರಿ ಬಿಡಿ, ಯಾವುದೋ ಗಡಿಬಿಡಿಯಲ್ಲಿ ಸಂಪಾದಕರು ಕನ್ನಡ ಪದ ನನಪಾಗದೇ ಆಂಗ್ಲ ಪದವನ್ನು ಉಳಿಸಿಕೊಂಡರು ಎಂದುಕೊಳ್ಳೋಣ. ಆದರೆ ಕನ್ನಡ ವಾಕ್ಯದ ಮಧ್ಯಭಾಗದಲ್ಲಿ ಆಂಗ್ಲ ಪದಪುಂಜವನ್ನು ಬಳಸಿಕೊಳ್ಳುವದರ ಕಾರಣವೇನು? ಮನೋರಮೆಯು ಮುದ್ದಣನಿಗೆ ಹೇಳುವಂತೆ ಇದು ಮುತ್ತಿನ ಸರದಲ್ಲಿ ಮೆಣಸನ್ನು ಪೋಣಿಸಿದಂತೆ ಅಲ್ಲವೆ? ಉದಾಹರಣೆಯನ್ನು ನೋಡಿರಿ:
"ಸದಾ ಮಂತ್ರಿಗಳ ಕಾರುಬಾರಿನಲ್ಲಿದ್ದ ವಿಧಾನಸೌಧ ಇಂದು
ಫಾರ್ ಎ ಚೇಂಜ್ ಅಧಿಕಾರಿಗಳ ದರ್ಬಾರಿನಲ್ಲಿ ಕಾಲ ಕಳೆಯುವಂತಾಗಿತ್ತು."
ಸಂಪಾದಕರು ಓದುಗರೊಡನೆ ಹರಟೆ ಹೊಡೆಯುವ ಧಾಟಿಯಲ್ಲಿ ಸುದ್ದಿಯನ್ನು ಹೇಳುತ್ತಿದ್ದಾರೆಂದರೆ, ಈ ಶೈಲಿಯನ್ನು ಒಪ್ಪಿಕೊಳ್ಳಬಹುದು. ಆದರೆ ಗಂಭೀರ ವರದಿಗೆ ಇದು ತಕ್ಕ ಧಾಟಿಯೆನಿಸುವದಿಲ್ಲ.
ಅಕ್ಟೋಬರ ೧೧ರಂದು ಪ್ರಕಟವಾದ ವರದಿಯ ಭಾಷೆ ಇನ್ನೂ ವಿಚಿತ್ರವಾಗಿದೆ:
ಈ ವರದಿಯ ಮೊದಲನೆಯ ದೋಷವೆಂದರೆ ‘ಸವದತ್ತಿ’ಯನ್ನು ‘ಸೌಂದತ್ತಿ’ ಎಂದು ಗ್ರಾಮ್ಯವಾಗಿ ಬರೆದಿದ್ದು. ಈ ವರದಿಯ ಪರಿಚ್ಛೇದ ಒಂದರ ಕೊನೆಯ ಸಾಲು ಹೀಗಿದೆ:
"ಇತ್ತೀಚೆಗೆ ಸುರಿದ ದಾರಕಾರ ಮಳೆಯ ಕೊನೆಯ ದಿನ ತನ್ನ ಕಿರಿಯ ಮಗನ ಮಾತು ನಿರ್ಲಕ್ಷಿಸಿ ಪ್ರತಿದಿನ ಸ್ಥಳದಲ್ಲಿ ಮಲಗಿಕೊಂಡಿದ್ದರೆ ಆತನ ಕುಟುಂಬಕ್ಕೆ ಇಂದು ಬೆಳಕು ಕಾಣುತ್ತಿರಲಿಲ್ಲ."
ಅರ್ಥವಾಯಿತೆ? ಸ್ವಲ್ಪ ತಿಣುಕಾಡಿದರೆ ಅರ್ಥ ಮಾಡಿಕೊಳ್ಳುವದು ಕಷ್ಟವೇನಲ್ಲ. ಆದರೆ ಸರಿಯಾದ ವಾಕ್ಯ ಹೀಗಿರಬೇಕಿತ್ತು:
"ಇತ್ತೀಚೆಗೆ ಸುರಿದ ಧಾರಾಕಾರ ಮಳೆಯ ಕೊನೆಯ ದಿನ ತನ್ನ ಕಿರಿಯ ಮಗನ ಮಾತನ್ನು ನಿರ್ಲಕ್ಷಿಸಿ ಪ್ರತಿ ದಿನದಂತೆಯೆ ಮಲಗಿಕೊಂಡಿದ್ದರೆ, ಆತನ ಕುಟುಂಬವು ಇಂದು ಬೆಳಕನ್ನು ಕಾಣುತ್ತಿರುತ್ತಿಲ್ಲ."
(೪) ವರದಿಯ ದೋಷಗಳು:ವರದಿಯ ದೋಷಗಳಿಗಾಗಿ ಈ ವರದಿಗಳನ್ನು ನೋಡಬಹುದು:
ಮೊದಲನೆಯ ವರದಿ ‘ಸಂಯುಕ್ತ ಕರ್ನಾಟಕ’ದಲ್ಲಿ ಸಪ್ಟಂಬರ ೩೦ರಂದು ಮೂರನೆಯ ಪುಟದಲ್ಲಿ ಪ್ರಕಟವಾಗಿದೆ. ಒಳ್ಳಯ ವರದಿಗೆಬೇಕಾದ ನಿಖರತೆ ಹಾಗೂ ಸಂಕ್ಷಿಪ್ತತೆಯ ಬದಲಾಗಿ ಜೊಳ್ಳು ಜೊಳ್ಳಾದ ವರ್ಣನೆ ಇಲ್ಲಿದೆ ಎಂದು ನನ್ನ ಅನಿಸಿಕೆ.
"ಜಿಲ್ಲೆಯಾದ್ಯಂತ ಇಂದು ಮಧ್ಯಾನ್ಹದಿಂದ ಬಿಟ್ಟುಬಿಡದೇ ಮಳೆ ಸುರಿದ ಹಿನ್ನೆಲೆಯಲ್ಲಿ ಎಲ್ಲೆಡೆ ನೀರೇ ನೀರು." ಎಂದು ಈ ವರದಿ ಪ್ರಾರಂಭವಾಗುತ್ತದೆ.
ಧಾರವಾಡ ಜಿಲ್ಲೆಯಲ್ಲಿ ಐದು ತಾಲೂಕುಗಳಿವೆ. ಕಲಘಟಗಿಯಂತಹ ಮಲೆನಾಡು ಹಾಗೂ ನವಲಗುಂದದಂತಹ ಬಯಲಸೀಮೆ ಈ ಜಿಲ್ಲೆಯಲ್ಲಿವೆ. ಇವುಗಳ ನಡುವಿನ ನೇರ ಅಂತರವು ಸುಮಾರು ೬೦ ಕಿಲೊಮೀಟರುಗಳಷ್ಟಾದರೂ ಇದ್ದೀತು. ’ಇಲ್ಲೆಲ್ಲಾ ಮಳೆ ಇಂದು ಮಧ್ಯಾಹ್ನವೇ ಪ್ರಾರಂಭವಾಯಿತೆ’, ಎನ್ನುವ ಸಂದೇಹ ಓದುಗನಿಗೆ ಬಾರದಿರದು. ಪತ್ರಿಕೆಯು ಇಂತಹ ಸಂದರ್ಭಗಳಲ್ಲಿ ಸಂದಿಗ್ಧ ಭಾಷೆಯನ್ನು ಬಳಸಬಾರದು. ಎರಡನೆಯದಾಗಿ ಮಳೆ ಸುರಿದದ್ದು ಹಿನ್ನೆಲೆಯಾಗುವದಿಲ್ಲ, ಕಾರಣವಾಗುತ್ತದೆ. ಈಗ ಈ ವಾಕ್ಯದ ವ್ಯಾಕರಣದ ತಪ್ಪುಗಳನ್ನಷ್ಟು ಗಮನಿಸಿರಿ: ‘ಮಧ್ಯಾಹ್ನ’ ಪದವನ್ನು ‘ಮಧ್ಯಾನ್ಹ’ ಎಂದು ಬರೆಯಲಾಗಿದೆ. ’ಬಿಟ್ಟೂಬಿಡದೆ’ ಎನ್ನುವದನ್ನು ‘ಬಿಟ್ಟುಬಿಡದೇ’ ಎಂದು ಬರೆಯಲಾಗಿದೆ.
ಈ ಒಂಟಿ ಸಾಲಿನ ಮುಂದಿನ ಪರಿಚ್ಛೇದವನ್ನು ಈಗ ಗಮನಿಸಿರಿ:
"ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ನಂತರ ಮಧ್ಯಾನ್ಹ 2ರ ಸುಮಾರಿಗೆ ಸಣ್ಣಗೆ ಸುರಿಯುತ್ತಿದ್ದ ಮಳೆ ಒಮ್ಮಿಂದೊಮ್ಮೆಲೇ ಜೋರಾಗಿ ಸುರಿಯಲು ಪ್ರಾರಂಭಿಸಿತು. ಮಳೆ ಬೀಳುವ ಸಂದರ್ಭದಲ್ಲಿ ಗಾಳಿಯೂ ಬೀಸುತ್ತಿರಲಿಲ್ಲ."
ಮೊದಲನೆಯದಾಗಿ, ವರದಿಗಾರರು ಜಿಲ್ಲೆಯನ್ನು ಬಿಟ್ಟುಕೊಟ್ಟು ಧಾರವಾಡ ಶಹರಕ್ಕೆ ಜಿಗಿದಂತೆ ಭಾಸವಾಗುತ್ತದೆ. ಎರಡನೆಯದಾಗಿ ಸಾಮಾನ್ಯ ಓದುಗನಿಗೆ ನಿಖರವಾದ ಹಾಗೂ ಸಂಕ್ಷಿಪ್ತವಾದ ಮಾಹಿತಿ ಬೇಕಾಗಿರುತ್ತದೆ. ಸಂತೆಯಲ್ಲಿ ಭೆಟ್ಟಿಯಾದ ಜನರು ತಮ್ಮತಮ್ಮಲ್ಲಿ ವಿನಿಮಯ ಮಾಡಿಕೊಳ್ಳುವಂತಹ ಜೊಳ್ಳು ಮಾತಿನಲ್ಲಿ ಅವನಿಗೆ ಆಸಕ್ತಿ ಇರುವದಿಲ್ಲ. ಮಳೆ ಒಮ್ಮಿಂದೊಮ್ಮೆಲೆ ಜೋರಾಯಿತೊ ಅಥವಾ ಕಾಲಕ್ರಮೇಣ ಜೋರಾಯಿತೊ ; ಮಳೆ ಬೀಳುವ ಸಂದರ್ಭದಲ್ಲಿ ಗಾಳಿ ಬೀಸುತ್ತಿತ್ತೊ ಇಲ್ಲವೊ ಎನ್ನುವ ಮಾಹಿತಿ ಓದುಗನಿಗೆ ಅನವಶ್ಯಕವಾಗಿದೆ. ಇಂತಿಷ್ಟು ಮಿಲಿಮೀಟರ ಮಳೆ ಆಗಿದೆ ಎಂದು ತಿಳಿಯುವದಷ್ಟೇ ಅವನಿಗೆ ಬೇಕಾಗಿರುತ್ತದೆ.
ಇದರ ಮುಂದಿನ ಪರಿಚ್ಛೇದದಲ್ಲಿ ಅಸ್ಪಷ್ಟತೆ ಇನ್ನೂ ಹೆಚ್ಚಾಗಿದೆ:
"ಸಂಜೆ 4ರ ಸಮಯದಲ್ಲಿ ಆಕಾಶದಲ್ಲಿ ಕಪ್ಪನೇ ಮೋಡಗಳು ಗೋಚರಿಸುತ್ತಿತ್ತು. ನಂತರ ಐದು ನಿಮಿಷಗಳ ಕಾಲ ಮಳೆ ನಿಂತಿತಾದರೂ ಮತ್ತೆ ಸುರಿಯಲು ಪ್ರಾರಂಬಿಸಿತು. ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಳ್ಳ ತುಂಬಿದ ವರದಿಗಳು ಬಂದಿವೆ. ನಗರದ ತಗ್ಗು ಪ್ರದೇಶಗಳಾದ ಬಾವಿಕಟ್ಟಿ ಪ್ಲಾಟ್, ಜನ್ನತ್ ನಗರ ಮತ್ತು ಲಕ್ಷ್ಮಿಸಿಂಗನ ಕೆರೆಯಲ್ಲಿ ನೀರು ತುಂಬಿವೆಯಾದರೂ ಅನಾಹುತಗಳು ಸಂಭವಿಸಿಲ್ಲ. ನಗರದ ಗಟಾರುಗಳು ತುಂಬಿದ್ದು ಜಿಲ್ಲೆಯಲ್ಲಿ ಎಲ್ಲ ಕಡೆಗಳಲ್ಲಿಯೂ ಮಳೆ ಬಿದ್ದ ವರದಿಯಾಗಿವೆ. ಹೊಲಗಳಲ್ಲಿ ನೀರು ಹರಿದಿವೆ. ಹಳ್ಳಗಳಲ್ಲಿ ನೀರು ಬಂದಿವೆಯಾದರೂ ಸಂಚಾರಕ್ಕೆ ಅಡ್ಡಿಯಾಗಿಲ್ಲ."
ವರದಿಯ ಪ್ರಕಾರ ಮೋಡ ಕವಿದ ವಾತಾವರಣ ಮುಂಜಾನೆಯಿಂದಲೇ ಇದೆ. ಮಳೆಯೂ ಸಹ ಬಿಟ್ಟೂಬಿಡದೇ ಬೀಳುತ್ತಿದೆ. ಅಂದ ಮೇಲೆ ಸಂಜೆ ನಾಲ್ಕರ ಸಮಯದಲ್ಲಿ ಆಕಾಶದಲ್ಲಿ ಕಪ್ಪನೆಯ ಮೋಡಗಳು ಗೋಚರಿಸುತ್ತಿದ್ದವು ಎಂದು ಹೇಳುವದರ ಔಚಿತ್ಯವೇನು? ಅಲ್ಲದೆ, "ಕಪ್ಪನೇ ಮೋಡಗಳು ಗೋಚರಿಸುತ್ತಿತ್ತು" ಎನ್ನುವದು ವ್ಯಾಕರಣದ ಕೊಲೆಯಲ್ಲವೆ?
"ಐದು ನಿಮಿಷಗಳ ನಂತರ ಮಳೆ ಸುರಿಯಲಾರಂಭಿಸಿತು" ಅಂದರೆ, ನಾಲ್ಕು ಹೊಡೆದು ಐದು ನಿಮಿಷಕ್ಕೆ ಮಳೆ ಪ್ರಾರಂಭವಾಯಿತೆ?
ಈ ಸಮಯವು ಇಡೀ ಧಾರವಾಡ ಜಿಲ್ಲೆಗೆ ಅನ್ವಯಿಸುವದೊ ಅಥವಾ ಧಾರವಾಡ ನಗರಕ್ಕೆ ಅನ್ವಯಿಸುವದೊ? ಧಾರವಾಡ ನಗರದಲ್ಲಿಯೇ ಒಂದೆಡೆ ಮಳೆ ಬೀಳುತ್ತಿದ್ದಾಗ, ಇನ್ನೊಂದೆಡೆ ಮಳೆ ಇರುವದಿಲ್ಲ. ಬಹುಶ: ಈ ಮಳೆ ವರದಿಗಾರರ ಮನೆಯ ಮೇಲೆ ಬೀಳುತ್ತಿತ್ತೇನೊ?!
ನಗರದಲ್ಲಿ ಬೀಳುತ್ತಿದ್ದ ಮಳೆಯ ವರದಿ ಒಮ್ಮೆಲೆ ಹಳ್ಳಿಗಳಿಗೆ ಜಿಗಿದು, ಅಲ್ಲಿ ಹಳ್ಳಗಳು ತುಂಬಿದ್ದನ್ನು ಅವಲೋಕಿಸಿ, ಮತ್ತೆ ನಗರದಲ್ಲಿ ನೀರು ತುಂಬಿದ ಭಾಗಗಳ ವರ್ಣನೆಗೆ ಮರಳುತ್ತದೆ! ಇದರ ಮುಂದಿನ ಪರಿಚ್ಛೇದವಂತೂ ಕನ್ನಡ ಸಾಲೆಯ ಹುಡುಗನ ನಿಬಂಧ(--’ಒಂದು ಮಳೆಗಾಲದ ದಿನ’--)ದಂತೆ ಭಾಸವಾಗುತ್ತದೆ:
"ಇಂದು ಸಂಜೆ ಜನರು ಕೊಡೆ ಹಿಡಿದುಕೊಂಡೇ ಅಡ್ಡಾಡುವ ದೃಶ್ಯ ಸಾಮಾನ್ಯವಾಗಿತ್ತು. ನಗರದಲ್ಲಿ ವಾಹನಗಳು ಪಕ್ಕಕ್ಕೆ ಹಾಯ್ದು ಹೋದರೆ ಅಲ್ಲಿ ನೀರಿನ ಸ್ನಾನ ಮಾಡಿಸುವದಂತೂ ಸತ್ಯವಿತ್ತು."
ವರದಿಯ ಕೊನೆಯ ಸಾಲಿನಲ್ಲಿ ‘ರವಿ ಕರಲಿಂಗಣ್ಣವರ’ ಎಂದು ಬಿಡಿಸಿ ಬರೆಯದೆ, ‘ರವಿಕರಲಿಂಗಣ್ಣವರ’ ಎಂದು ಕೂಡಿಸಿ ಬರೆಯಲಾಗಿದೆ.
ಇದೇ ದಿನಾಂಕದ ಮತ್ತೊಂದು ಪುಟದಲ್ಲಿರುವ ವರದಿ ಹೀಗಿದೆ:
"ಬರಗಾಲ ಪೀಡಿತ ಎಂದು ಘೋಷಿಸಲಾಗಿದ್ದ ಶಿರಹಟ್ಟಿ ಮತ್ತು ಮುಂಡರಗಿ ತಾಲೂಕಿನಲ್ಲಿ ಅಂಕಿ ಅಂಶಗಳ ಪ್ರಕಾರ ಉತ್ತಮವಾಗಿ ಮಳೆ ಸುರಿಯುತ್ತಿದೆ."
"ಅಂಕಿ ಅಂಶಗಳ ಪ್ರಕಾರ ಮಳೆ ಸುರಿಯುತ್ತಿದೆ" ಎಂದು ಹೇಳಿದರೆ, ವಾಸ್ತವದಲ್ಲಿ ಹಾಗಿಲ್ಲ ಎನ್ನುವ ಅರ್ಥ ಹೊಮ್ಮುವದಿಲ್ಲವೆ? ಎರಡನೆಯದಾಗಿ ಅಂಕಿ ಅಂಶಗಳು ಪತ್ರಿಕೆಯನ್ನು ತಲುಪಿದಾಗ ಮಳೆ ಸುರಿದು ಮುಗಿದಿರುತ್ತಿದೆ. ಆದುದರಿಂದ ‘ಮಳೆ ಸುರಿಯುತ್ತಿದೆ’ ಎಂದು ವರ್ತಮಾನಕಾಲದಲ್ಲಿ ಹೇಳಬಾರದು. ಮೂರನೆಯದಾಗಿ ಈ ಮಳೆ ಜನರಿಗೆ ಬೇಕಾಗಿರಲಿಲ್ಲ. ಆದುದರಿಂದ ‘ಉತ್ತಮವಾಗಿ’ ಎಂದು ವರ್ಣಿಸಬಾರದು ; ‘ಜೋರಾಗಿ’ ಎಂದು ಹೇಳಬಹುದಿತ್ತು.
ಅಕ್ಟೋಬರ ೮ನೆಯ ದಿನಾಂಕದ ೫ನೆಯ ಪುಟದಲ್ಲಿ, ರಸಾಯನ ಶಾಸ್ತ್ರದಲ್ಲಿ ನೋಬೆಲ್ ಪದಕವನ್ನು ಪಡೆದ ಶ್ರೀ ರಾಮಕೃಷ್ಣನ್ ವೆಂಕಟರಾಮನ್ ಅವರನ್ನು "ಅಮೆರಿಕ ಮೂಲದ ಭಾರತೀಯ ವಿಜ್ಞಾನಿ" ಎಂದು ಬರೆಯಲಾಗಿದೆ. ಈ ವ್ಯತ್ಯಸ್ತ ವರ್ಣನೆಯನ್ನು ರೋಚಕ ಪ್ರಮಾದವೆಂದು ಭಾವಿಸಿ ಸಮಾಧಾನಪಟ್ಟುಕೊಳ್ಳಬೇಕಷ್ಟೆ!
(೫) ಮಾಹಿತಿಯ ತಪ್ಪುಗಳು:ಅಕ್ಟೋಬರ ೧೩ನೆಯ ದಿನಾಂಕದ ‘ಸಂಯುಕ್ತ ಕರ್ನಾಟಕ’ದ ‘ರಸಪ್ರಶ್ನೆ’ ವಿಭಾಗದಲ್ಲಿ ಕೇಳಲಾದ ಪ್ರಶ್ನೆ ಹಾಗೂ ಕೊಡಲಾದ ಉತ್ತರ ಹೀಗಿವೆ:
ಪ್ರಶ್ನೆ: ‘ಸಂಸ್ಕಾರ’ ಚಲನಚಿತ್ರದ ನಿರ್ದೇಶಕರು ಯಾರು?
ಕೊಟ್ಟ ಉತ್ತರ: ಗಿರೀಶ್ ಕಾರ್ನಾಡ್.
ಇದು ತಪ್ಪು ಉತ್ತರ. ‘ಸಂಸ್ಕಾರ’ ಚಲನಚಿತ್ರವನ್ನು ನಿರ್ದೇಶಿಸಿದವರು ಪಟ್ಟಾಭಿ ರೆಡ್ಡಿಯವರು. ಅವರ ಹೆಂಡತಿ ಸ್ನೇಹಲತಾ ರೆಡ್ಡಿಯವರು ಈ ಚಿತ್ರದ ಮುಖ್ಯ ಸ್ತ್ರೀ ಪಾತ್ರದಲ್ಲಿ ಹಾಗು ಗಿರೀಶ ಕಾರ್ನಾಡರು ಮುಖ್ಯ ಪುರುಷಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶನದಲ್ಲಿ ಕಾರ್ನಾಡರ ಪಾಲು ಇದ್ದಿರಬಹುದು. ಆದರೆ ಚಿತ್ರದ ಶೀರ್ಷಿಕೆಗಳ ಪ್ರಕಾರ ಪಟ್ಟಾಭಿಯವರೇ ನಿರ್ದೇಶಕರು.
ಎಪ್ಪತ್ತಾರು ವರ್ಷಗಳ ಇತಿಹಾಸವಿರುವ ‘ಸಂಯುಕ್ತ ಕರ್ನಾಟಕ’ ಯಾಕೆ ಈ ರೀತಿ ಎಡವುತ್ತ ನಡೆಯುತ್ತಿದೆ?